ಹೊಸದಿಗಂತ ಡಿಜಿಟಲ್ ಡೆಸ್ಕ್:
ವಂದೇ ಮಾತರಂಗೆ ಸಂಬಂಧಿಸಿದ ಘಟನೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ನೀಡಿರುವ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಹಾಗೂ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಹೈಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸುವುದಾಗಿ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ವಿಕಾಸ್ ಪುತ್ತೂರು ಹೇಳಿದ್ದಾರೆ.
ಉರ್ವ ಪೊಲೀಸ್ ಠಾಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಂಡು ಎಫ್ಐಆರ್ ದಾಖಲಿಸುವಂತೆ ವಿಕಾಸ್ ಪುತ್ತೂರು ದೂರು ಸಲ್ಲಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್ನಲ್ಲಿ ಪ್ರೈವೇಟ್ ಕಂಪ್ಲೇಂಟ್ ರಿಜಿಸ್ಟರ್ (PCR) ಸಲ್ಲಿಸುವುದಾಗಿ ತಿಳಿಸಿದರು.
ವಂದೇ ಮಾತರಂಗೆ ಅವಮಾನ ಆರೋಪ
ದೆಹಲಿಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ವಂದೇ ಮಾತರಂ ಗಾಯನ ನಡೆಯುತ್ತಿದ್ದಾಗ ಸೋನಿಯಾ ಗಾಂಧಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವಿಕಾಸ್ ಪುತ್ತೂರು ಆರೋಪಿಸಿದರು. ವಂದೇ ಮಾತರಂ ನಿಲ್ಲಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ ಎಂಬುದಾಗಿ ಅವರು ದೂರಿದರು.
ಇದನ್ನೂ ಓದಿ:
ಕಾನೂನು ಕ್ರಮಕ್ಕೆ ಆಗ್ರಹ
ವಂದೇ ಮಾತರಂಗೆ ಅವಮಾನ ಮಾಡುವುದು ಕಾನೂನು ಕ್ರಮಕ್ಕೆ ಕಾರಣವಾಗುತ್ತದೆ ಎಂದು ವಿಕಾಸ್ ಪುತ್ತೂರು ಹೇಳಿದರು. ಆರೋಪದ ಕುರಿತು ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಸ್ಪಷ್ಟನೆ
ಆದರೆ ಕಾಂಗ್ರೆಸ್ ಪಕ್ಷವು ಆರೋಪವನ್ನು ತಳ್ಳಿಹಾಕಿದ್ದು, ಸೋನಿಯಾ ಗಾಂಧಿ ಅವರ ನಡೆ ವಂದೇ ಮಾತರಂ ಗಾಯನಕ್ಕೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದೆ. ಕಾರ್ಯಕ್ರಮದಲ್ಲಿ ವಂದೇ ಮಾತರಂ ಸರಿಯಾದ ರೀತಿಯಲ್ಲಿ ನಡೆಯುವಂತೆ ವ್ಯವಸ್ಥೆ ಪರಿಶೀಲಿಸುವ ಉದ್ದೇಶದಿಂದ ಅವರು ಮಧ್ಯಪ್ರವೇಶಿಸಿದ್ದರು ಎಂದು ಕಾಂಗ್ರೆಸ್ ತಿಳಿಸಿದೆ.



