April 29, 2026
Wednesday, April 29, 2026
spot_img

ಹೋಟೆಲ್‌ಗಳಿಗೆ ಹೆಚ್ಚುವರಿ ಅಡುಗೆ ಅನಿಲ ಸಿಗುತ್ತೋ ಇಲ್ವೋ?: ‘ಮಂಗಳ’ಕರ ಸಭೆಯಲ್ಲಿ ನಿರ್ಧಾರದ ನಿರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದಲ್ಲಿ ಅಡುಗೆ ಅನಿಲದ ಕೊರತೆಯಿಂದ ಹೋಟೆಲ್‌ಗಳು ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆ, ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಅವರು ಮಂಗಳವಾರ ನಡೆಯಲಿರುವ ಸಭೆಯಲ್ಲಿ ಹೋಟೆಲ್‌ಗಳಿಗೆ ಹೆಚ್ಚುವರಿ ಅಡುಗೆ ಅನಿಲ ನೀಡುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದ ಸಚಿವರು, ಹೋಟೆಲ್‌ಗಳಿಗೆ ಸುಮಾರು 20% ಪ್ರಮಾಣದಲ್ಲಿ ಅನಿಲ ವಿತರಣೆ ನಡೆಯುತ್ತಿದ್ದು, ಆಸ್ಪತ್ರೆಗಳಂತಹ ಅಗತ್ಯ ಸೇವಾ ಕ್ಷೇತ್ರಗಳಿಗೆ 100% ಪೂರೈಕೆ ಮಾಡಲಾಗುತ್ತಿದೆ ಎಂದರು. ಈ ಸಂಬಂಧವಾಗಿ ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರೊಂದಿಗೆ ಚರ್ಚೆ ನಡೆದಿದ್ದು, ತ್ವರಿತ ಪರಿಹಾರ ಕ್ರಮಗಳನ್ನು ಜಾರಿಗೆ ತರಲು ಒತ್ತು ನೀಡಲಾಗಿದೆ.

ಇದನ್ನೂ ಓದಿ:

ಮಂಗಳವಾರದ ಸಭೆಯಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಲಭ್ಯತೆ ಹೆಚ್ಚಿಸುವ ಬಗ್ಗೆ ಮತ್ತಷ್ಟು ಚರ್ಚೆ ನಡೆಯಲಿದ್ದು, ಹೋಟೆಲ್‌ಗಳಿಗೆ ಹೆಚ್ಚುವರಿ ಸಿಲಿಂಡರ್‌ಗಳನ್ನು ನೀಡುವ ಸಾಧ್ಯತೆ ಇದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಜನರು ಅನಾವಶ್ಯಕ ಆತಂಕಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ಇದರ ಜೊತೆಗೆ, ಗೃಹ ಬಳಕೆದಾರರಿಗೆ ನಗರ ಪ್ರದೇಶಗಳಲ್ಲಿ 25 ದಿನಕ್ಕೊಮ್ಮೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಕ್ಕೊಮ್ಮೆ ಸಿಲಿಂಡರ್‌ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇಂಧನದ ಲಭ್ಯತೆ ಹಾಗೂ ಪೆಟ್ರೋಲ್-ಡೀಸೆಲ್ ದರಗಳ ವಿಚಾರದಲ್ಲಿಯೂ ಸರ್ಕಾರ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !