ಹೊಸದಿಗಂತ , ಶಿವಮೊಗ್ಗ:
ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಮಾರ್ಚ್ 15 ರಂದು ಈ ಬಗ್ಗೆ ನಡೆಯಲಿರುವ ಸಭೆ ಬಳಿಕ ತೀರ್ಮಾನ ಪ್ರಕಟಿಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಶುಕ್ರವಾರ ಸಂಜೆ ನಗರದ ಬಂಜಾರ ‘ವನದಲ್ಲಿ ಸಭೆ ಮಾಡುತ್ತಿದ್ದಾರೆ. ಏನು ಅನ್ಯಾಯ ಆಗಿದೆ ಅಂತ ಸಭೆಯಲ್ಲಿ ಹೇಳುತ್ತಾರೆ. ನಂತರ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಇಡೀ ರಾಜ್ಯದ ಹಿಂದುಳಿದ ವರ್ಗದವರು ನನಗೆ ಫೋನ್ ಮಾಡುತ್ತಿದ್ದಾರೆ. ನಿಮಗೆ ಪಕ್ಷದಿಂದ ನೋವಾಗಿದೆ ಎನ್ನುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲ ತಪ್ಪು ಆಗಿದೆ. ತಪ್ಪಗಳು ಸರಿ ಆಗಬೇಕು ಎಂದು ಚರ್ಚೆ ಮಾಡಲಾಗುವುದು. ಪಕ್ಷದ ದೋಷಗಳು ಸರಿ ಆಗಬೇಕು. ಪಕ್ಷದ ಭವಿಷ್ಯದ ಬಗ್ಗೆ ಚರ್ಚೆ ಮಾಡಲಾಗುವುದು. ಈಗಲೂ ಪಕ್ಷ ನನ್ನ ತಾಯಿ. ಊಹಾಪೋಹಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದರು.
ಮೂಲಗಳ ಪ್ರಕಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಈಶ್ವರಪ್ಪ ಕಣಕ್ಕೆ ಇಳಿಯುವ ಸಾಧ್ಯತೆ ಇದ್ದು. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.