ಹೊಸದಿಗಂತ ಡಿಜಿಟಲ್ ಡೆಸ್ಕ್:
370 ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಹಿಡಿದ್ದಿದ್ದು, ಈ ತೀರ್ಪನ್ನು ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಸ್ವಾಗತಿಸಿದ್ದಾರೆ. ಜೊತೆಗೆ ಈ ವಿಚಾರವಾಗಿ ಪ್ರಧಾನಿ ಮೋದಿ ಅವರು ಗ್ಯಾರಂಟಿ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಉದ್ಧವ್, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜಮ್ಮು-ಕಾಶ್ಮೀರಕ್ಕೆ ಆದಷ್ಟು ಬೇಗ ರಾಜ್ಯ ಸ್ಥಾನಮಾನ ನೀಡಿ ವಿಧಾನಸಭೆ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಈ ಹಿಂದೆ ನಾವು ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರದ ಕ್ರಮವನ್ನು ನಾವು ಬೆಂಬಲಿಸಿದ್ದೆವು. ಇದೀಗ ಮುಂದಿನ ವರ್ಷ ಸೆಪ್ಟೆಂಬರ್ ಒಳಗಾಗಿ ವಿಧಾನಸಭೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಅದರಂತೆ ಅಲ್ಲಿ ಬೇಗ ಚುನಾವಣೆ ನಡೆದು ಜನರು ಶಾಂತಿಯುತವಾಗಿ ಮತದಾನ ಮಾಡಲಿ ಎಂದಿದ್ದಾರೆ.
ನಮ್ಮ ದೇಶದ ಅವಿಭಾಜ್ಯ ಅಂಗವಾಗಿರುವ ಕಾಶ್ಮೀರಕ್ಕೆ ಪಿ ಯನ್ನು ಸೇರ್ಪಡೆಗೊಳಿಸಿ ಚುನಾವಣೆ ನಡೆಸಬೇಕೆಂದು ನಾವು ಸರ್ಕಾರಕ್ಕೆ ಆಗ್ರಹಿಸುತ್ತೇವೆ. ಇತ್ತೀಚಿನ ದಿನಗಳಲ್ಲಿ ಗ್ಯಾರಂಟಿ ಎಂಬ ಪದ ಹೆಸರುವಾಸಿಯಾಗಿದ್ದು, ಕಾಶ್ಮೀರಿ ಪಂಡಿತರು ತಮ್ಮ ತವರಿಗೆ ಹಿಂತಿರುಗಿ ಮತದಾನ ಮಾಡುವ ಬಗ್ಗೆ ಯಾರು ಗ್ಯಾರಂಟಿ ಕೊಡುತ್ತಾರೆ. ಪಂಡಿತರು ಸುರಕ್ಷಿತವಾಗಿ ಕಾಶ್ಮೀರಕ್ಕೆ ಹಿಂತಿರುಗುತ್ತಾರೆಯೇ ಎಂಬ ಬಗ್ಗೆ ಪ್ರಧಾನಿ ಮೋದಿ ಅವರು ಗ್ಯಾರಂಟಿ ಕೊಡುತ್ತಾರೆಯೇ ಎಂದು ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಶ್ನಿಸಿದ್ದಾರೆ.