ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಂಸ್ಮರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾವನಾತ್ಮಕ ಟ್ವೀಟ್ ಮಾಡಿದ್ದು ದೇಶಕ್ಕಾಗಿ ನೀವು ಕಂಡ ಕನಸು ಈಡೆರಿಸಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.
ದಿವಂಗತ ರಾಜೀವ್ ಗಾಂಧಿಯವರ 78ನೇ ಜನ್ಮದಿನದಂದು ತಂದೆಯ ಸವಿ ನೆನಪಿನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ಅಪ್ಪಾ, ನೀವು ಪ್ರತಿ ಕ್ಷಣವೂ ನನ್ನೊಂದಿಗೆ ಇದ್ದೀರಿ, ನನ್ನ ಹೃದಯದಲ್ಲಿ. ದೇಶಕ್ಕಾಗಿ ನೀವು ಕಂಡ ಕನಸನ್ನು ನನಸಾಗಿಸಲು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಸಂದರ್ಭದಲ್ಲಿ ಹತ್ಯೆಯಾದರು. ರಾಜೀವ್ ಗಾಂಧಿಯವರ ಜೊತೆಗೆ ಕನಿಷ್ಠ 14 ಮಂದಿ ಕೊಲ್ಲಲ್ಪಟ್ಟದ್ದಿರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಬರ್ಟ್ ವಾದ್ರಾ, ಸಂಸದ ಕೆಸಿ ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಶನಿವಾರ ಬೆಳಗ್ಗೆ ನವದೆಹಲಿಯ ವೀರಭೂಮಿಯಲ್ಲಿ ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ರಾಜಕಾರಣಿಗಳು ಟ್ವಿಟರ್ನಲ್ಲಿ ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.