ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ ಪರಿಶಿಷ್ಟ ಜಾತಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಕೃತ್ಯವನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಘಟನೆಯನ್ನು ಖಂಡಿಸಿ ನಾಳೆ ದಿನ ಬಿಜೆಪಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದೊಡ್ಡ ಪ್ರತಿಭಟನೆ ನಡೆಸಲಿದೆ ಎಮದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುತ್ತಾರೆ. ಇಂದು ಕೂಡಾ ಅಧಿವೇಶನ ಮುಗಿದ ಬಳಿಕ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ನಮ್ಮ ಪಕ್ಷದ ಮುಖಂಡರು, ಹಿರಿಯರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ರಾಜ್ಯ ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಜನತೆಗೂ ಗೊತ್ತಾಗಿದೆ. ನಾಳೆ ಕೇಂದ್ರದಿಂದ ಒಂದು ತಂಡವು ಬೆಳಗಾವಿಗೆ ಭೇಟಿ ಕೊಡಲಿದೆ. ಸಂಸದರಾದ ಅಪರಾಜಿತ್ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಹ್ಲಿ, ಲಾಕೆಟ್ ಚಟರ್ಜಿ ಅಲ್ಲದೆ ಕೇಂದ್ರ ಸಚಿವೆ ಆಶಾ ಲಾಕ್ಡಾ ಅವರು ಸಂತ್ರಸ್ತೆಯನ್ನು ಭೇಟಿ ಮಾಡಲಿದ್ದಾರೆ. ಘಟನೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದರು.
ಈ ಸಂದರ್ಭ ಶಾಸಕರಾದ ಧೀರಜ್ ಮುನಿರಾಜು, ಚಂದ್ರು ಲಮಾಣಿ ಅವರು ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ