ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಸಿಗದಿದ್ದರೆ ವಿಶ್ವದ ದೊಡ್ಡ ಜನಸಂಖ್ಯೆಯು ಮತ್ತೆ ಬಡತನಕ್ಕೆ ಮರಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.
ನೆದರ್ಲ್ಯಾಂಡ್ಸ್ ರಾಜಧಾನಿ ಹೇಗ್ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಸುತ್ತ ಯುದ್ಧ, ಜಾಗತಿಕ ತೈಲ ಬಿಕ್ಕಟ್ಟು, ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದ ಎದುರಾಗುವ ಸವಾಲುಗಳ ಕುರಿತು ಕಳವಳ ವ್ಯಕ್ತಪಡಿಸಿದರು.
ಜಗತ್ತು ಮೊದಲು ಕೊರೋನಾ ಸಾಂಕ್ರಾಮಿಕ ರೋಗವನ್ನು ಎದುರಿಸಿತು. ಈಗ ಯುದ್ಧಗಳಿಂದಾಗಿ ಇಂಧನ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿದ್ದೇವೆ. ಈ ಪರಿಸ್ಥಿತಿ ಬದಲಾಗದಿದ್ದರೆ, ವಿಶ್ವದ ಆರ್ಥಿಕತೆ, ಅದರಲ್ಲೂ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ ಎಂದು ಮೋದಿ ಎಚ್ಚರಿಕೆ ನೀಡಿದರು.
ಇಂದು ವಿಶ್ವವು ಯುದ್ಧದ ಸಂಘರ್ಷಗಳು, ಕಚ್ಚಾ ತೈಲದ ಬೆಲೆ ಏರಿಕೆ, ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಅಡೆತಡೆಗಳು, ಇಂಧನ ಕೊರತೆಗಳನ್ನು ಎದುರಿಸುತ್ತಿದೆ. ಇದರಿಂದ ಆರ್ಥಿಕ ಬೆಳವಣಿಗೆ ಕುಂಠಿತವಾಗಲಿದೆ. ಆಮದು ಇಂಧನದ ಮೇಲೆ ಅವಲಂಬಿತವಾಗಿರುವ ಬಡ ರಾಷ್ಟ್ರಗಳಿಗೆ ಗಂಭೀರ ಸಂಕಷ್ಟವನ್ನು ತರಬಹುದು. ಅಭಿವೃದ್ಧಿ ಸಾಧಿಸಿದ ರಾಷ್ಟ್ರಗಳ ಪ್ರಗತಿಯನ್ನು ಇದು ಅಳಿಸಿಹಾಕಬಹುದು ಮತ್ತು ಮತ್ತೆ ಬಡತನ ಮರಳಬಹುದು ಎಂದು ತಿಳಿಸಿದರು.
ಇದೇ ವೇಳೆ ಭವಿಷ್ಯಕ್ಕಾಗಿ ವಿಶ್ವಾಸಾರ್ಹ ಮತ್ತು ಪಾರದರ್ಶಕ ಪೂರೈಕೆ ಸರಪಳಿಗಳನ್ನು ನಿರ್ಮಿಸಲು ಭಾರತ ಮತ್ತು ನೆದರ್ಲ್ಯಾಂಡ್ಸ್ ಒಟ್ಟಾಗಿ ಕೆಲಸ ಮಾಡುತ್ತಿವೆ. ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಐತಿಹಾಸಿಕ ವ್ಯಾಪಾರ ಒಪ್ಪಂದದಿಂದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ಎರಡೂ ದೇಶಗಳ ನಡುವೆ ವ್ಯಾಪಾರ ಮತ್ತು ಹೂಡಿಕೆಗೆ ಹೊಸ ಅವಕಾಶಗಳನ್ನುಸಿಗಲಿದೆ ಎಂದು ಅವರು ಹೇಳಿದರು.



