ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಹಿರಿಯ ಕ್ರೀಡಾಪಟುಗಳು ಇಂದು ತಮ್ಮ ಪದಕಗಳನ್ನು ಹರಿದ್ವಾರದ ಹರ್ ಕಿ ಪೌರಿಯಲ್ಲಿ ಗಂಗಾ ನದಿಗೆ ಎಸೆಯುವುದಾಗಿ ತೆರಳಿದ್ದರು. ಆದರೆ ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು , ಕೇಂದ್ರ ಸರ್ಕಾರಕ್ಕೆ ಐದು ದಿನಗಳ ಡೆಡ್ ಲೈನ್ ನೀಡಿದ್ದಾರೆ.
ಹರಿದ್ವಾರದ ಹರ್ ಕಿ ಪೌರಿಗೆ ಬಂದಿದ್ದ ಪ್ರತಿಭಟನಾನಿರತ ಕುಸ್ತಿಪಟುಗಳು ಇದೀಗ ರೈತ ಮುಖಂಡ ನರೇಶ್ ಟಿಕಾಯತ್ ಅವರ ಮನವೊಲಿಕೆಗೆ ಮಣಿದಿದ್ದು, ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಐದು ದಿನಗಳ ನಂತರ ಮತ್ತೆ ಹಿಂತಿರುಗುತ್ತೇವೆ ಎಂದು ಹೇಳಿದ್ದಾರೆ. ಇನ್ನು ಪದಕಗಳನ್ನು ರೈತ ಮುಖಂಡ ನರೇಶ್ ಟಿಕಾಯತ್ ಅವರಿಗೆ ನೀಡಿದ್ದಾರೆ. ಪ್ರತಿಭಟನಾ
ನಿರತ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಲು ಕೇಂದ್ರ ಸರ್ಕಾರಕ್ಕೆ ಐದು ದಿನಗಳ ಕಾಲಾವಕಾಶ ನೀಡಿದ್ದಾರೆ.
ಲೈಂಗಿಕ ಕಿರುಕುಳದ ಆರೋಪದ ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹಿಂತಿರುಗುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಗಡುವು ಮುಗಿಯುವವರೆಗೆ ಕ್ರೀಡಾಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯದಿರಲು ನಿರ್ಧರಿಸಿದ್ದಾರೆ.