ಹೊಸದಿಗಂತ ವರದಿ ಮಡಿಕೇರಿ:
ಪ್ರತಿಯೊಬ್ಬರೂ ಪ್ರತಿನಿತ್ಯ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಆರೋಗ್ಯಯುತ ಬದುಕಿಗೆ ಸಹಕಾರಿ ಎಂದು ಶಾಸಕ ಎಂ.ಪಿ.ಅಪ್ಪಚ್ವುರಂಜನ್ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ, ಜಿಲ್ಲಾ ಆಯೂಷ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯೋಗ ಒಕ್ಕೂಟ ಸಹಕಾರದಲ್ಲಿ ನಗರದ ಸಾಯಿ ಹಾಕಿ ಟರ್ಫ್’ನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಯೋಗಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯೋಗಥಾನ್ ಕಾರ್ಯಕ್ರಮವನ್ನು 15 ದಿನಗಳಿಗೊಮ್ಮೆ ನಡೆಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಯೋಗ ಪ್ರದರ್ಶನಕ್ಕಿಂತಲೂ ನಮ್ಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಅತ್ಯವಶ್ಯಕ. ಒಳ್ಳೆಯ ಜೀವನಕ್ಕೆ ಪ್ರತಿನಿತ್ಯ ಯೋಗ ಮಾಡುವಂತಾಗಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಅವರು ಮಾತನಾಡಿ, ಮಡಿಕೇರಿ, ಪೊನ್ನಂಪೇಟೆ ಮತ್ತು ಕೂಡಿಗೆಯ ಹಾಕಿ ಟರ್ಫ್’ನಲ್ಲಿ ಯೋಗಥಾನ್ ಆಯೋಜಿಸಲಾಗಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು ಎಂದು ತಿಳಿಸಿದರು. ಯೋಗ ಶಿಕ್ಷಕ ಕೆ.ಕೆ. ಮಹೇಶ್ ಕುಮಾರ್ ಅವರು ಯೋಗಥಾನ್ ಕಾರ್ಯಕ್ರಮ ನಡೆಸಿಕೊಟ್ಟರು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸದಾಶಿವ ಪಲ್ಲೇದ್ ಇದ್ದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗದಾಮಯ್ಯ, ತಹಶಿಲ್ದಾರ್ ಪಿ.ಎಸ್.ಮಹೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ, ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾದೇವಿ ಮತ್ತಿತರರು ಯೋಗಾಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.