ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು.
ವಿಚಾರಣೆಗೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಇನ್ನೂ ಕೆಲವು ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದೆ. ‘ವಿಚಾರಣೆ ಇದ್ದಾಗ ಕಡ್ಡಾಯವಾಗಿ ಹಾಜರಾಗಬೇಕು’ ಎಂದಿದೆ.
ದರ್ಶನ್, ಬೆನ್ನು ನೋವಿನ ಕಾರಣ ನೀಡಿ ನ್ಯಾಯಾಲಯದ ವಿಚಾರಣೆಯಿಂದ ವಿನಾಯಿತಿ ಕೋರಿದ್ದರು. ಇತ್ತೀಚೆಗಷ್ಟೆ ‘ಡೆವಿಲ್’ ಸಿನಿಮಾದ ಶೂಟಿಂಗ್ಗಾಗಿ ನಟ ದರ್ಶನ್ ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಸುಮಾರು 28 ಗಂಟೆಗಳ ಕಾಲ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು ಎನ್ನಲಾಗಿದೆ. ಇದರಿಂದಾಗಿ ಅವರಿಗೆ ಬೆನ್ನು ನೋವು ಉಲ್ಬಣವಾಗಿದ್ದ ಕಾರಣ ಇಂದು ವಿಚಾರಣೆಗೆ ಗೈರಾಗಿದ್ದರು.
ಈ ವಿಷಯವನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಹೈಕೊರ್ಟ್ ಜಾಮೀನು ಷರತ್ತಿನಲ್ಲಿ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಅನುಮತಿ ನೀಡಿತ್ತು ಎಂದು ತಿಳಿಸಿ ಆದೇಶ ಪ್ರತಿಯನ್ನು ನ್ಯಾಯಾಧೀಶರಿಗೆ ವಕೀಲರು ನೀಡಿದರು. ಆದರೆ ಸಮಜಾಯಿಷಿಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ವಿಚಾರಣೆ ವೇಳೆ ಆರೋಪಿಗಳು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದರು.