ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ನೇಮಕಾತಿ ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿನ ಸಮಸ್ಯೆಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ ತೀವ್ರಗೊಂಡಿತು.
ಗಾಂಧಿ ಮೈದಾನದಿಂದ ಮುಖ್ಯಮಂತ್ರಿ ನಿವಾಸದತ್ತ ಮೆರವಣಿಗೆ ನಡೆಸಿದ BPSC ಉದ್ಯೋಗಾಕಾಂಕ್ಷಿಗಳು ಡಾಕ್ ಬಂಗಲೆ ವೃತ್ತದ ಬಳಿ ಪೊಲೀಸ್ ಬ್ಯಾರಿಕೇಡ್ಗಳನ್ನು ಮುರಿದು ಮುನ್ನುಗ್ಗಲು ಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ವಾಟರ್ ಕ್ಯಾನನ್ ಬಳಸಿದ್ದಾರೆ.
ವಾಟರ್ ಕ್ಯಾನನ್ಗೂ ಜಗ್ಗದ ವಿದ್ಯಾರ್ಥಿಗಳು
ವಾಟರ್ ಕ್ಯಾನನ್ ಬಳಕೆಯ ನಡುವೆಯೂ ವಿದ್ಯಾರ್ಥಿಗಳು ಹಿಂದೆ ಸರಿಯದೆ ನೀರಿನ ಜಲಧಾರೆಯಲ್ಲೇ ಕುಣಿದು ಪ್ರತಿಭಟನೆ ಮುಂದುವರಿಸಿದರು. ಬ್ಯಾರಿಕೇಡ್ ಮುರಿಯುವ ಮುನ್ನ ಪ್ರತಿಭಟನಾಕಾರರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು. ರಾಷ್ಟ್ರಧ್ವಜ ಹಿಡಿದು ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆಯಲ್ಲಿ ಡಾಕ್ ಬಂಗಲೆ ವೃತ್ತ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. CRPF ಮತ್ತು RAF ಸಿಬ್ಬಂದಿಯನ್ನೂ ನಿಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಹಲವು ವಾರಗಳಿಂದ ಗರ್ದಾನಿಬಾಗ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:
ಪ್ರಮುಖ ಬೇಡಿಕೆಗಳೇನು?
BPSC-TRE 4 ಪರೀಕ್ಷೆಯನ್ನು ಏಕ ಹಂತದಲ್ಲಿ ನಡೆಸಬೇಕು, ನೇಮಕಾತಿಯಲ್ಲಿ ಪಾರದರ್ಶಕತೆ ಹೆಚ್ಚಿಸಬೇಕು, BSSC ಮೂಲಕ ನೇಮಕಾತಿ ಪರೀಕ್ಷೆ ನಡೆಸಬೇಕು ಹಾಗೂ ಹಿಂದಿ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ 70ನೇ BPSC ಪರೀಕ್ಷೆ ರದ್ದುಗೊಳಿಸುವಂತೆಯೂ ಆಗ್ರಹಿಸಿದ್ದಾರೆ.
ಸಮಸ್ಯೆ ಪರಿಹರಿಸಿದ್ದೇವೆ ಎಂದ ಸರ್ಕಾರ
ವಿದ್ಯಾರ್ಥಿಗಳು ಎತ್ತಿರುವ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಿದ್ದು, ಮಾತುಕತೆಗೆ ಮುಕ್ತವಾಗಿದೆ ಎಂದು ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ ಹೇಳಿದ್ದಾರೆ. ಯುವಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದಿದ್ದಾರೆ.



