ಹೊಸದಿಗಂತ ಕಲಬುರಗಿ:
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಬುಧವಾರ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಲಾರ್ಪಣೆ ಮಾಡಿದರು.
ಶನಿವಾರ ರಾತ್ರಿಯೇ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು,ನಗರರ ಐವನ್ ಶಾಹಿ ಅತಿಥಿ ಗೃಹ ವಾಸ್ತವ್ಯ ಹೂಡಿದ್ದು, ಬುಧವಾರ ಬೆಳಿಗ್ಗೆ ಭಾಗದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಸರ್ದಾರ್ ಪಟೇಲರಿಗೆ ಗೌರವ ಸಲ್ಲಿಸಿ ಪರೇಡ್ ಮೈದಾನದತ್ತ ಸಾಗಿದರು.
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿನ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರ ಗ್ರಾಮದ ಡೊಳ್ಳು ಕುಣಿತ ತಂಡದಿಂದ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ,ಸಚಿವ ಭೈರತಿ ಸುರೇಶ್,ಕೆಕೆಆರಡಿಬಿ ಅಧ್ಯಕ್ಷ ಡಾ.ಅಜಯ್ ಧರ್ಮಸಿಂಗ್,ಸಂಸದ ರಾಧಾಕೃಷ್ಣ ದೊಡ್ಡಮನಿ,ಶಾಸಕರಾದ ಅಲ್ಲಂಪ್ರಭು ಪಾಟೀಲ್,ಬಿ.ಆರ್.ಪಾಟೀಲ್,ಎಂ.ವೈ.ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪಾ ಕಮಕನೂರ್,ಬಿ.ಜಿ.ಪಾಟೀಲ್, ಜಗದೇವ್ ಗುತ್ತೇದಾರ್,ಖನಿಜ್ ಫಾತಿಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು.